Categories
ಕೃಷಿ ಕೃಷಿ ಚಟುವಟಿಕೆಗಳು ಕೃಷಿ ಸಂಸ್ಕೃತಿ

ಕೃಷಿ ಆಚರಣೆಗಳು

ಕರ್ನಾಟಕದ ಆಧುನಿಕ ಚರಿತ್ರೆಯಲ್ಲಿ ಕರ್ನಾಟಕದ ಏಕೀಕರಣ ಒಂದು ಮಹತ್ವ ಪೂರ್ಣ ಐತಿಹಾಸಿಕ ಘಟನೆ. ಹಾಗೆಯೇ ಕನ್ನಡ ವಿಶ್ವವಿದ್ಯಾಲಯದ ಸ್ಥಾಪನೆಯೂ ಮತ್ತೊಂದು ಮಹತ್ವದ ಘಟನೆ. ಕನ್ನಡ-ಕನ್ನಡಿಗ-ಕರ್ನಾಟಕ ಸಂಸ್ಕೃತಿಯ ಕಲ್ಪನೆಯಡಿಯಲ್ಲಿ ಅಸ್ತಿತ್ವಕ್ಕೆ ಬಂದ ಕನ್ನಡ ವಿಶ್ವವಿದ್ಯಾಲಯದ ಹರವು ವಿಸ್ತಾರವಾದುದ್ದು. ಈ ಕಾರಣದಿಂದ ಕನ್ನಡ ವಿಶ್ವವಿದ್ಯಾಲಯದ ಆಶಯ ಮತ್ತು ಗುರಿ ಇತರ ವಿಶ್ವವಿದ್ಯಾಲಯಗಳಿಗಿಂತ ಭಿನ್ನ ಹಾಗೂ ಪ್ರಗತಿಪರ. ಕನ್ನಡ ಸಾಮರ್ಥ್ಯವನ್ನು ಎಚ್ಚರಿಸುವ ಕಾಯಕವನ್ನು ಉದ್ದಕ್ಕೂ ಅದು ನೋಂಪಿಯಿಂದ ಮಾಡಿಕೊಂಡು ಬಂದಿದೆ, ಕರ್ನಾಟಕದ ‘ವಿಕಾಸ’ ಈ ವಿಶ್ವವಿದ್ಯಾಲಯದ ಮಹತ್ತರ ಆಶಯವಾಗಿದೆ.

ಕನ್ನಡ ಅಧ್ಯಯನ ಮೂಲತಃ ಶುದ್ಧ ಜ್ಞಾನದ, ಕಾಲ, ದೇಶ, ಜೀವನ ತ್ವತ್ವದ ಪರವಾಗಿರುವುದರ ಜೊತೆಗೆ ಅಧ್ಯಯನವನ್ನು ಒಂದು ವಾಗ್ವಾದದ ಭೂಮಿಕೆ ಎಂದು ನವು ಭಾವಿಸಬೇಕಾಗಿದೆ. ಕನ್ನಡ ಬದುಕಿನ ಚಿಂತನೆಯ ಭಾಗವೆಂದೇ ಅದನ್ನು ರೂಪಿಸಿ ವಿವರಿಸಬೇಕಗಿದೆ. ಅಂದರೆ : ದೇಸಿ ಬೆರುಗಳ ಗುರುತಿಸುವಿಕೆ ಕನ್ನಡ ಅಧ್ಯಯನ ಮುಖ್ಯ ಭಿತ್ತಿಯಾಗಬೇಕಾಗಿದೆ. ಕನ್ನಡ ಸಂಸ್ಕೃತಿಯು ಬಹುತ್ವದ ನೆಲೆಗಳನ್ನು ಆಧರಿಸಿ ರೂಪುಗೊಂಡಿದೆ. ಸಮಾಜಮುಖಿ ಚಿಂತನೆಗಳ ವ್ಯಾಪಕ ಅಧ್ಯಯನ ಬದುಕಿನ ಸಂಕೀರ್ಣ ಲಕ್ಷಣಗಳ ಸ್ವರೂಪವನ್ನು ಇದು ಪರಿಚಯಿಸುತ್ತದೆ. ನಾವು ಇದನ್ನು ಎಲ್ಲ ವಲಯಗಳಲ್ಲಿ ಕನ್ನಡದ ಅನುಷ್ಠಾನದ ಮೂಲಕ ಉಳಿಸಿ, ಬೆಳೆಸಬೇಕಾಗಿದೆ. ಆಗ ಕನ್ನಡ ಸಂಸ್ಕೃತಿಯು ವಿಶ್ವಪ್ರಜ್ಞೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ‘ಕನ್ನಡದ್ದೇ ಮಾದರಿ’ ಯ ಶೋಧ ಇಂದಿನ ಮತ್ತು ಬರುವ ದಿನಗಳ ತೀವ್ರ ಅಗತ್ಯವಾಗಿದೆ.

ಕನ್ನಡ ಸಂಸ್ಕೃತಿಯ ಭಾಗವಾಗಿರುವ ಕನ್ನಡ ಅಧ್ಯಯನವು ಕಾಲದಿಂದ ಕಾಲಕ್ಕೆ ಹೊಸ ತಿಳಿವಳಿಕೆಯನ್ನು ತನ್ನ ತೆಕ್ಕೆಗೆ ಜೋಡಿಸಿಕೊಳ್ಳುತ್ತ ಬಂದಿದೆ. ಹೀಗಾಗಿ ವಿದೇಶಿ ಮತ್ತು ದೇಶಿ ವಿದ್ವಾಂಸರು ಕಾಲದಿಂದ ಕಾಲಕ್ಕೆ ಹೊಸಬೆಳೆಯನ್ನು ತೆಗೆಯುತ್ತ ಬಂದಿದ್ದಾರೆ. ಕನ್ನಡ ಅಧ್ಯಯನ ಪಳೆಯುಳಿಕೆಯ ಶಾಸ್ತ್ರವಾಗದೆ, ಬದಲಾಗುತ್ತಿರುವ ಕಾಲಮಾನದಲ್ಲಿ ಎದುರಾಗುತ್ತಿರುವ ಆಹ್ವಾನಕ್ಕೆ ತಕ್ಕಂತೆ ತನ್ನ ಗತಿಯನ್ನು ಬದಲಾಯಿಸಿಕೊಳ್ಳತ್ತ ಬಂದಿರುವುದು ಗಮನಿಸತಕ್ಕ ಅಂಶ. ಸಾಂಪ್ರದಾಯಿಕ ಚಿಂತನೆಗಳು ಆಧುನೀಕರಣದ ಈ ಕಾಲಘಟ್ಟದಳ್ಲಿ ಸಕಾಲಿಕಗೊಳ್ಳುವುದು ಅನಿವಾರ್ಯವಾಗಿದೆ. ಮಾಹಿತಿ ತಂತ್ರಜ್ಞಾನದ ಮೂಲಕ ಜಗತ್ತಿನ ಜ್ಞಾನಪ್ರವಾಹವೇ ನಮ್ಮ ಅಂಗೈಯೊಳಗೆ ಚುಳುಕಾಗುವ ಈ ಸಂದರ್ಭದಲ್ಲಿ ಕನ್ನಡದ ಚಹರೆ ಮತ್ತು ಕನ್ನಡ ಭಾಷೆಯ ಚಲನಶೀಲತೆಯನ್ನು ಶೋಧಿಸಲಿಕ್ಕೆ ಭಾಷಾ ಆಧುನೀಕರಣ ಮತ್ತು ಪ್ರಮಾಣೀಕರಣದ ಪ್ರಕ್ರಿಯೆಗಳ ನೆಲೆಯಲ್ಲಿ ಅಧ್ಯಯನದ ಹೊಸ ಸಾಧ್ಯತೆಗಳನ್ನು ಅನುಲಕ್ಷಿಸಿ, ಭಾಷಾನೀತಿ, ಭಾಷಾಯೋಜನೆ ರೂಪಿಸುವುದು ಅನಿವಾರ್ಯ ಹಾಗೂ ಅವಶ್ಯವಾಗಿದೆ. ಆಗ ಅಧ್ಯಯನದ ಸ್ವರೂಪ ಹಾಗೂ ಬಳಕೆಯ ವಿಧಾನದಲ್ಲಿ ಪರಿವರ್ತನೆ ಸಾಧ್ಯವಾಗುತ್ತದೆ.

ನಮ್ಮೆದುರು ನುಗ್ಗಿ ಬರುತ್ತಿರುವ ಜಗತಿಕರಣಕ್ಕೆ ಪ್ರತಿರೋಧವಾಗಿ ನಮ್ಮ ದೇಶೀಯ ಜ್ಞನಪರಂಪರೆಯನ್ನು ಮರುಶೋಧಿಸಿ ಆ ಮೂಲಕ ಕುಸಿಯುತ್ತಿರುವ ನಮ್ಮ ಬೇರುಗಳನ್ನು ಬಲಗೊಳಿಸಿಕೊಳ್ಳಬೇಕಾಗಿದೆ. ಭಾಷೆ, ಸಾಹಿತ್ಯ, ವ್ಯಾಕರಣ, ಛಂದಸ್ಸು, ಚರಿತ್ರೆ, ಕೃಷಿ, ವೈದ್ಯ, ಪರಿಸರ ಮುಂತಾದ ಅಧ್ಯಯನ ವಿಷಯಗಳನ್ನು ಹೊಸ ಆಲೋಚನೆಯಲ್ಲಿ ವಿಶ್ಲೇಷಿಬೇಕಾಗಿದೆ. ಆಧುನಿಕ ವಿಜ್ಞಾನ, ತಂತ್ರಜ್ಞಾನವೇ ‘ಜ್ಞಾನ’ ಎಂದು ರೂಪಿಸಿರುವ ಇಂದಿನ ಆಲೋಚನೆಗೆ ಪ್ರತಿಯಾಗಿ ಈ ಜ್ಞಾನಶಾಖೆಗಳಲ್ಲಿ ಹುದುಗಿರುವ ದೇಶಿ ಪರಂಪರೆಯ ಜ್ಞಾನದ ಹುಡುಕಾಟ ನಡೆಯಬೇಕಾಗಿದೆ. ಅಂತಹ ಪ್ರಯತ್ನಗಳಿಗೆ ಬೇಕಾದ ಮಾರ್ಗದರ್ಶಕ ಸೂತ್ರಗಳ ಹಾಗೂ ಆಕರ ಪರಿಕರಗಳ ನಿರ್ಮಾಣದ ನೆಲೆ ತುಂಬ ಮುಖ್ಯವಾಗಿದೆ. ಕನ್ನಡ ವಿಶ್ವವಿದ್ಯಾಲಯವು ಕಳೆದ ಹದಿನಾರು ವರ್ಷಗಳಿಂದ ಈ ಕೆಲಸಗಳನ್ನು ಹಲವು ಯೋಜನೆಗಳ ಮೂಲಕ ರೂಪಿಸಿಕೊಂಡಿದೆ, ರೂಪಿಸಿಕೊಳ್ಳುತ್ತಿದೆ. ಇದೊಂದು ಚಲನಶೀಲ ಪ್ರಕ್ರಿಯೆಯಾಗಿದೆ. ಸಮಕಾಲೀನ ಭಾಷಿಕ, ಸಾಂಸ್ಕೃತಿಕ ಸಮಸ್ಯೆಗಳಿಗೆ ಮುಖಾಮುಖಿಯಾಗುತ್ತ ಕನ್ನಡ ನಡುನುಡಿಯನ್ನು ಹೊಸದಾಗಿ ಶೋಧಿಸುತ್ತಾ, ವಿವರಿಸುತ್ತಾ ಬಂದಿದೆ. ಅಂದರೆ: ಕನ್ನಡದ ಅರಿವಿನ ವಿಕೇಂದ್ರೀಕರಣವಾದ ವರ್ತಮಾನದ ಹೊಸ ಬೆಳವಣಿಗೆ. ಇದು ಕನ್ನಡ ವಿಶ್ವವಿದ್ಯಾಲಯದ ಜೀವಧಾತುವಾಗಿದೆ.

ಕನ್ನಡ ವಿಶ್ವವಿದ್ಯಾಲಯವು ಕನ್ನಡದ ಹತ್ತಾರು ಕ್ಷೇತ್ರಗಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಕುರಿತು ಸಾಮಾನ್ಯ ಓದುಗರಿಗೆ ಅರಿವನ್ನು ನೀಡಲು ಮಂಟಪಮಾಲೆಯಲ್ಲಿ ಕಿರುಪುಸ್ತಕಗಳನ್ನು ಪ್ರಕಟಿಸುತ್ತಿದೆ. ‘ಕೃಷಿ ಆಚರಣೆಗಳು’ ಎಂಬ ಕಿರುಹೊತ್ತಿಗೆಯನ್ನು ಈ ಮಾಲೆಗಾಗಿ ಬರೆದು ಕೊಟ್ಟಿರುವ ಶ್ರೀ ವೀರೇಂದ್ರ ಶೀಲವಂತ ಅವರಿಗೆ ವಿಶ್ವವಿದ್ಯಾಲಯದ ಕೃತಜ್ಞತೆಗಳು ಸಲ್ಲುತ್ತವೆ.

ಈ ಗ್ರಂಥವನ್ನು ಅಚ್ಚುಕಟ್ಟಾಗಿ ಹೊರತರುತ್ತಿರುವ ಪ್ರಸಾರಾಂಗದ ನಿರ್ದೇಶಕರಾದ ಡಾ. ಮಂಜುನಾಥ ಬೇವಿನಕಟ್ಟಿ ಮತ್ತು ಸಹಾಯಕ ನಿರ್ದೇಶಕರಾದ ಶ್ರೀ ಬಿ. ಸುಜ್ಞಾನ ಮೂರ್ತಿ ಅವರಿಗೆ ಆಭಾರಿಯಾಗಿದ್ದೇನೆ.

ಡಾ. . ಮುರಿಗೆಪ್ಪ
ಕುಲಪತಿ