ನೇಗಿಲ ಹಿಡಿದಾ ಹೊಲದೊಳು ಹಾಡುತ
ಉಳುವಾ ಯೋಗಿಯ ನೋಡಲ್ಲಿ.
ಫಲವನು ಬಯಸದ ಸೇವೆಯ ಪೂಜೆಯು
ಕರ್ಮವೆ ಇಹಪರ ಸಾಧನವು.
ಕಷ್ಟದೊಳನ್ನವ ದುಡಿವನೆ ತ್ಯಾಗಿ
ಸೃಷ್ಟಿನಿಯಮದೊಳವನೇ ಭೋಗಿ.
ಲೋಕದೊಳೇನೇ ನಡೆಯುತಲಿರಲಿ
ತನ್ನೀಕಾರ್ಯವ ಬಿಡನೆಂದೂ:
ರಾಜ್ಯಗಳುದಿಸಲಿ ರಾಜ್ಯಗಳಳಿಯಲಿ,
ಹಾರಲಿ ಗದ್ದುಗೆ ಮುಕುಟಗಳು,
ಮುತ್ತಿಗೆ ಹಾಕಲಿ ಸೈನಿಕರೆಲ್ಲ,
ಬಿತ್ತುಳುವುದನವ ಬಿಡುವುದೆ ಇಲ್ಲ.
ಬಾಳಿತು ನಮ್ಮೀ ನಾಗರಿಕತೆ ಸಿರಿ
ಮಣ್ಣುಣಿ ನೇಗಿಲಿನಾಶ್ರಯದಿ;
ನೇಗಿಲ ಹಿಡಿದಾ ಕೈಯಾಧಾರದಿ
ದೊರೆಗಳು ದರ್ಪದೊಳಾಳಿದರು.
ನೇಗಿಲ ಬಲದೊಳು ವೀರರು ಮೆರೆದರು,
ಶಿಲ್ಪಿಗಳೆಸೆದರು ಕವಿಗಳು ಬರೆದರು.
ಯಾರೂ ಅರಿಯದ ನೇಗಿಲ ಯೋಗಿಯೆ
ಲೋಕಕೆ ಅನ್ನವನೀಯುವನು.
ಹೆಸರನು ಬಯಸದೆ ಅತಿ ಸುಖಕೆಳಸದೆ
ದುಡಿವನು ಗೌರವಕಾಶಿಸದೆ.
ನೇಗಿಲ ಕುಳದೊಳಗಡಗಿದೆ ಕರ್ಮ;
ನೇಗಿಲ ಮೇಲೆಯೆ ನಿಂತಿದೆ ಧರ್ಮ.
– ಕುವೆಂಪು
Leave A Comment